ಬಿಜೆಪಿ ಮಹಿಳಾ ಸಮಾವೇಶಕ್ಕೆ ಬಂದಿದ್ದ ಕೇಂದ್ರ ಸಚಿವೆಯ ಕಾರು ಅಪಘಾತ..!

ವಿಜಯಪುರ: ಕೇಂದ್ರ ಸಚಿವೆ ಪ್ರಯಾಣಿಸುತ್ತಿದ್ದ ಕಾರು ಅಪಘಾತವಾಗಿದೆ. ಕೇಂದ್ರ ಸರ್ಕಾರದ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ರಾಜ್ಯ ಸಚಿವೆ ಸಾಧ್ವಿ ನಿರಂಜನಾ ಜ್ಯೋತಿ ಪ್ರಯಾಣ ಮಾಡುತ್ತಿದ್ದ ಕಾರು ವಿಜಯಪುರ ತಾಲೂಕಿನ ಜುಮನಾಳ ಗ್ರಾಮದ ಬಳಿ, ವಿಜಯಪುರ‌ ಹುಬ್ಬಳ್ಳಿ ರಾಷ್ಟ್ರೀಯ ಹೆದ್ದಾರಿ 50 ರಲ್ಲಿ ಅಪಘಾತವಾಗಿದೆ.

ಕೇಂದ್ರ ಸಚಿವೆ ಪ್ರಯಾಣ ಮಾಡುತ್ತಿದ್ದ ಕಾರ್ ಹಾಗೂ ಕ್ಯಾಂಟರ್ ಮಧ್ಯೆ ಡಿಕ್ಕಿ ಸಂಭವಿಸಿದ್ದು, ಘಟನೆಯಲ್ಲಿ ಕೇಂದ್ರ ಸಚಿವರಿಗೆ ಹಾಗೂ ಕಾರ್ ಚಾಲಕನಿಗೆ ಸಣ್ಣಪುಟ್ಟ ಗಾಯವಾಗಿದೆ. ಗಾಯಗೊಂಡ ಕೇಂದ್ರ‌‌ ಸಚಿವೆ ಸಾದ್ವಿ ನಿರಂಜನಾ‌ ಜ್ಯೋತಿ ಹಾಗೂ ಕಾರ್ ಚಾಲಕನನ್ನು ವಿಜಯಪುರ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಅದೃಷ್ಟವಶಾತ್ ಯಾರಿಗೂ ಗಂಭೀರ ಗಾಯವಾಗಿಲ್ಲ ಎಂದು ಪೊಲೀಸ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ‌..

ವಿಜಯಪುರ ನಗರದಲ್ಲಿ ಇಂದು ನಡೆದ ಬಿಜೆಪಿ ಮಹಿಳಾ ಸಮಾವೇಶ ಹಾಗೂ ಇತರ ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದ ಕೇಂದ್ರ ಸಚಿವೆ, ಕಾರ್ಯಕ್ರಮಗಳ ಬಳಿಕ ಬಾಗಲಕೋಟೆಯತ್ತ ಪ್ರಯಾಣ ಬೆಳೆಸುತ್ತಿದ್ದರು.

ಇನ್ನು ಅಪಘಾತದ ಪರಿಣಾಮ‌ ಎನ್ಎಚ್ 50 ಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ‌. ಸ್ಥಳಕ್ಕೆ ವಿಜಯಪುರ ಗ್ರಾಮೀಣ ಪೊಲೀಸರ ಬೇಟಿ ನೀಡಿದ್ದಾರೆ. ಟ್ರಾಫಿಕ್ ಜಾಮ್ ಕ್ಲಿಯರ್ ಮಾಡಿ ವಾಹನ ಸಂಚಾರ ಸುಗಮಗೊಳಿಸಿದ್ದಾರೆ ಪೊಲೀಸರು. ವಿಜಯಪುರ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ‌.

error: Content is protected !!