ವೋಟರ್ ಲಿಸ್ಟ್ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ಚರ್ಚಿಸಲು ಮುಂಡಗೋಡ ತಾಲೂಕು ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಇಂದು (ಮಂಗಳವಾರ, ಜೂನ್ 30) ಮಧ್ಯಾಹ್ನ 2 ಗಂಟೆಗೆ ಮಹತ್ವದ ಸಭೆಯನ್ನು ಆಯೋಜಿಸಲಾಗಿದೆ.
ಮುಂಡಗೋಡ ಪಟ್ಟಣದ ಸರ್ಕಾರಿ ಆಸ್ಪತ್ರೆ ಎದುರಿನ ಗಣಪತಿ ದೇವಸ್ಥಾನದ ಕಲ್ಯಾಣ ಮಂಟಪದಲ್ಲಿ ಈ ಸಭೆ ನಡೆಯಲಿದೆ. ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ ಭೀಮಣ್ಣ ನಾಯ್ಕ ಅವರು ಈ ಸಭೆಯನ್ನು ಉದ್ಘಾಟಿಸಿ ಮಾತನಾಡಲಿದ್ದಾರೆ. ಕಾರ್ಯಕ್ರಮದಲ್ಲಿ ಯಲ್ಲಾಪುರ ಕ್ಷೇತ್ರದ ಶಾಸಕ ಶಿವರಾಮ ಹೆಬ್ಬಾರ್, ಮಾಜಿ ಶಾಸಕ ವಿ.ಎಸ್. ಪಾಟೀಲ, ಕೆಪಿಸಿಸಿ ಸದಸ್ಯ ವಿವೇಕ ಹೆಬ್ಬಾರ್ ಸೇರಿದಂತೆ ಪಕ್ಷದ ಪ್ರಮುಖ ನಾಯಕರು ಭಾಗವಹಿಸಲಿದ್ದಾರೆ.
ಕಡ್ಡಾಯ ಹಾಜರಾತಿಗೆ ಮನವಿ..!
ವೋಟರ್ ಲಿಸ್ಟ್ ವಿಶೇಷ ತೀವ್ರ ಪರಿಷ್ಕರಣೆ ಕುರಿತು ಮಾರ್ಗದರ್ಶನ ನೀಡುವ ಉದ್ದೇಶದಿಂದ ಆಯೋಜಿಸಿರುವ ಈ ಸಭೆಗೆ ಮುಂಡಗೋಡ ತಾಲೂಕಿನ 16 ಗ್ರಾಮ ಪಂಚಾಯಿತಿಗಳು ಹಾಗೂ ಪಟ್ಟಣ ಪಂಚಾಯಿತಿ ವ್ಯಾಪ್ತಿಯ 91 ಬೂತ್ಗಳ ಬೂತ್ ಲೆವೆಲ್ ಏಜೆಂಟರುಗಳು (BLA), ತಾಲೂಕು ಮುಖಂಡರು, ಘಟಕ ಸಮಿತಿ ಅಧ್ಯಕ್ಷರು ಹಾಗೂ ಬೂತ್ ಅಧ್ಯಕ್ಷರು ಕಡ್ಡಾಯವಾಗಿ ಹಾಜರಾಗುವಂತೆ ಆಯೋಜಕರು ಮನವಿ ಮಾಡಿದ್ದಾರೆ.
ಈ ಕುರಿತು ತಾಲೂಕು ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಕೃಷ್ಣ ಎಚ್. ಹಿರೇಹಳ್ಳಿ ಹಾಗೂ ತಾಲೂಕು ಬ್ಲಾಕ್ ಕಾಂಗ್ರೆಸ್ ಸಾಮಾಜಿಕ ಜಾಲತಾಣ ವಿಭಾಗದ ಅಧ್ಯಕ್ಷ ಡಿ.ಕೆ. ನಡಗೇರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
