ಮುಂಡಗೋಡ: ಪೊಲೀಸ್ ಇಲಾಖೆಯ ಪ್ರಮುಖ ಹುದ್ದೆಯ ಪೋಸ್ಟಿಂಗ್ಗಾಗಿ ಹಣದ ವ್ಯವಹಾರಕ್ಕೆ ಸಂಬಂಧಿಸಿದಂತೆ ಮಾತುಕತೆ ನಡೆದಿದೆ ಎನ್ನಲಾದ ಆಡಿಯೋ ವೈರಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಡಗೋಡ ಕ್ರೈಂ ಪಿಎಸ್ಐ ಆಗಿದ್ದ ವಿನೋದ್ ರೆಡ್ಡಿ ಸೇರಿ ಮೂವರು ಪಿಎಸ್ಐಗಳನ್ನು ಅಮಾನತು ಮಾಡಲಾಗಿದೆ.

ಮೂವರು ಸಸ್ಪೆಂಡ್..!
ಮುಂಡಗೋಡಿನ ಕ್ರೈಂ ಪಿಎಸ್ಐ ವಿನೋದ್ ರೆಡ್ಡಿ, ಹಳಿಯಾಳದ L&O ಪಿಎಸ್ಐ ಕಿರಣ್ ಪಾಟೀಲ್ ಹಾಗೂ ಕ್ರೈಂ ವಿಭಾಗದ ಪಿಎಸ್ಐ ಕೃಷ್ಣ ಅವರನ್ನು ಅಮಾನತು ಮಾಡಲಾಗಿದೆ ಎಂದು ವರದಿಯಾಗಿದೆ.
ಈ ಮೂವರು ಅಧಿಕಾರಿಗಳ ನಡುವೆ ನಡೆದ ಮಾತುಕತೆ ಎನ್ನಲಾದ ಆಡಿಯೋ ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಆಡಿಯೋದಲ್ಲಿ ಪೊಲೀಸ್ ಇಲಾಖೆಯಲ್ಲಿನ ಪ್ರಮುಖ ಹುದ್ದೆ ಹಾಗೂ ಪೋಸ್ಟಿಂಗ್ಗೆ ಸಂಬಂಧಿಸಿದಂತೆ ಹಣದ ವ್ಯವಹಾರದ ಕುರಿತು ಮಾತುಕತೆ ನಡೆದಿದೆ ಎನ್ನಲಾಗಿದ್ದು, ಪ್ರಕರಣವು ಪೊಲೀಸ್ ಇಲಾಖೆಯಲ್ಲಿ ಚರ್ಚೆಗೆ ಗ್ರಾಸವಾಗಿತ್ತು.
ಆಡಿಯೋ ಬಗ್ಗೆ ತನಿಖೆ..! ಆಡಿಯೋವನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್ ಅವರು ಗಂಭೀರವಾಗಿ ಪರಿಗಣಿಸಿದ್ದು, ಪ್ರಕರಣದ ಕುರಿತು ತನಿಖೆ ನಡೆಸುವಂತೆ ಸೂಚಿಸಿದ್ದರು ಎನ್ನಲಾಗಿದೆ. ತನಿಖೆಯ ವೇಳೆ ಅಧಿಕಾರಿಗಳ ಹೇಳಿಕೆ ಸೇರಿದಂತೆ ವಿವಿಧ ಅಂಶಗಳನ್ನು ಪರಿಶೀಲಿಸಲಾಗಿದೆ.
ತನಿಖೆ ಪೂರ್ಣಗೊಂಡ ಬಳಿಕ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳ ವರದಿ ಆಧರಿಸಿ ಮೂವರು ಪಿಎಸ್ಐಗಳನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ ಎಂದು ತಿಳಿದುಬಂದಿದೆ.
ಇಲಾಖೆಯಲ್ಲಿ ಚರ್ಚೆ..!
ಪೊಲೀಸ್ ಇಲಾಖೆಯ ಅಧಿಕಾರಿಗಳ ನಡುವಿನ ಮಾತುಕತೆ ಎನ್ನಲಾದ ಆಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವುದು ಇಲಾಖೆಯಲ್ಲೂ ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ಆಡಿಯೋ ನಿಜವೇ? ಅದರಲ್ಲಿರುವ ಮಾತುಕತೆ ಯಾವ ಸಂದರ್ಭದ್ದು? ಎಂಬುದರ ಕುರಿತು ತನಿಖೆ ನಡೆದಿದ್ದು, ತನಿಖೆಯ ನಂತರವೇ ಅಮಾನತು ಕ್ರಮ ಕೈಗೊಳ್ಳಲಾಗಿದೆ ಎನ್ನಲಾಗಿದೆ.
ಒಟ್ಟಾರೆ, ಹಳಿಯಾಳದಲ್ಲಿ ಪೊಲೀಸ್ ಅಧಿಕಾರಿಗಳ ಮಾತುಕತೆ ಎನ್ನಲಾದ ಆಡಿಯೋ ವೈರಲ್ ಪ್ರಕರಣ ಇದೀಗ ಮೂವರು ಪಿಎಸ್ಐಗಳ ಅಮಾನತಿನೊಂದಿಗೆ ಮತ್ತಷ್ಟು ಗಂಭೀರ ಸ್ವರೂಪ ಪಡೆದುಕೊಂಡಿದೆ.
