ಯಲ್ಲಾಪುರ: ತಾಲೂಕಿನ ಅರತಿಬೈಲ್ ಘಾಟ್ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದ ಸ್ಥಳಕ್ಕೆ ಉತ್ತರ ಕನ್ನಡ ಜಿಲ್ಲೆಯ ಉನ್ನತಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಜಿಲ್ಲಾಧಿಕಾರಿ (ಡಿಸಿ) ಲಕ್ಷ್ಮೀಪ್ರಿಯಾ, ಜಿಲ್ಲಾ ಪೊಲೀಸ್ ಅಧೀಕ್ಷಕ (ಎಸ್ಪಿ) ದೀಪನ್ ಎಂ.ಎನ್., ಹಾಗೂ ಶಿರಸಿ ಉಪವಿಭಾಗದ ಡಿವೈಎಸ್ಪಿ ಶ್ರೀಮತಿ ಗೀತಾ ಪಾಟೀಲ್ ಸೇರಿದಂತೆ ಪ್ರಮುಖ ಅಧಿಕಾರಿಗಳ ತಂಡ ಘಟನಾ ಸ್ಥಳಕ್ಕೆ ಧಾವಿಸಿ ಪರಿಸ್ಥಿತಿಯನ್ನು ಹತ್ತಿರದಿಂದ ಅವಲೋಕಿಸಿದೆ.

ಪ್ರವಾಸಕ್ಕೆ ಹೊರಟಿದ್ದವರು ಮಸಣಕ್ಕೆ.!
ಧಾರವಾಡ ಮೂಲದ 9 ಜನರ ತಂಡವೊಂದು ಕ್ರೂಸರ್ ವಾಹನದಲ್ಲಿ ಪ್ರವಾಸಕ್ಕೆಂದು ಹೊರಟಿತ್ತು. ಆದರೆ, ಯಲ್ಲಾಪುರದ ಅರತಿ ಘಾಟ್ ಬಳಿ ಬರುತ್ತಿದ್ದಂತೆಯೇ ಎದುರಿನಿಂದ ಬಂದ ಲಾರಿಯೊಂದಿಗೆ ಇವರ ವಾಹನವು ಭೀಕರವಾಗಿ ಮುಖಾಮುಖಿ ಡಿಕ್ಕಿಯಾಗಿದೆ.
ಸ್ಥಳದಲ್ಲೇ ಆರು ಮಂದಿ ದುರ್ಮರಣ..!
ಡಿಕ್ಕಿಯ ತೀವ್ರತೆ ಎಷ್ಟಿತ್ತೆಂದರೆ ಕ್ರೂಸರ್ ವಾಹನದಲ್ಲಿದ್ದ 9 ಜನರ ಪೈಕಿ 6 ಜನ ಸ್ಥಳದಲ್ಲೇ ಅತ್ಯಂತ ದುರಂತವಾಗಿ ಕೊನೆಯುಸಿರೆಳೆದಿದ್ದಾರೆ. ಉಳಿದ ಮೂವರು ತೀವ್ರವಾಗಿ ಗಾಯಗೊಂಡಿದ್ದು, ಅವರನ್ನು ತಕ್ಷಣವೇ ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಅಪಘಾತ ಸ್ಥಳಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿಗಳು ಹಾಗೂ ಪೊಲೀಸ್ ಅಧಿಕಾರಿಗಳು, ಮೃತರ ಕುಟುಂಬಸ್ಥರಿಗೆ ಸಾಂತ್ವನ ಹೇಳಲು ಮತ್ತು ಗಾಯಾಳುಗಳಿಗೆ ಸೂಕ್ತ ತುರ್ತು ವೈದ್ಯಕೀಯ ನೆರವು ಒದಗಿಸಲು ಅಧಿಕಾರಿಗಳಿಗೆ ಅಗತ್ಯ ಸೂಚನೆಗಳನ್ನು ನೀಡಿದ್ದಾರೆ. ಈ ಭೀಕರ ದುರಂತಕ್ಕೆ ಸಂಬಂಧಿಸಿದಂತೆ ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

ಪ್ರಮುಖ ಸುದ್ದಿ ಯಲ್ಲಾಪುರದ ಆರತಿಬೈಲ್ ಘಟ್ಟದಲ್ಲಿ ಭೀಕರ ರಸ್ತೆ ಅಪಘಾತ; ಆರು ಮಂದಿ ಸ್ಥಳದಲ್ಲೇ ಸಾವು, ಮೂವರಿಗೆ ಗಂಭೀರ ಗಾಯ..!
